ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳ ಮೇಲೆ ದೇಶದ ಭವಿಷ್ಯ ಅಡಗಿದೆ ನೆಹರೂ ಅವರು ಮಕ್ಕಳನ್ನು ಹೆಚ್ಚು ಪ್ರೀತಿಸುತ್ತಿದ್ದರು ಅಷ್ಟೇ ಮಹತ್ವನ್ನು ಶಿಕ್ಷಣಕ್ಕೆ ನೀಡಿದ್ದರು ದೇಶ ಆರೋಗ್ಯಕರವಾಗಿ ಬೆಳೆಯಲು ಶಿಕ್ಷಣ ಬಹಳ ಮುಖ್ಯ – ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು, ನ. 14,-
ದೇಶ ಉತ್ತಮವಾಗಿ ಮತ್ತು ಆರೋಗ್ಯಕರವಾಗಿ ಬೆಳೆಯಬೇಕಾದರೆ ಶಿಕ್ಷಣ ಬಹಳ ಮುಖ್ಯ. ಶಿಕ್ಷಣದಿಂದ ಮಾತ್ರ ಸಮಾಜದಲ್ಲಿ ಬದಲಾವಣೆ ತರಲಾಗುವುದು. ಇದನ್ನು ಅರಿತ ನಮ್ಮ ಪ್ರಪ್ರಥಮ ಪ್ರಧಾನಮಂತ್ರಿಗಳಾದ ಜವಹಾರಲಾಲ್ ನೆಹರು ಅವರು ಶಿಕ್ಷಣಕ್ಕೆ ಹೆಚ್ಚಿನ ಮಹತ್ವವನ್ನು ನೀಡಿದ್ದರು. ದೇಶದ ಭವಿಷ್ಯ ರೂಪಿತ ಆಗುವುದು ವೈಚಾರಿಕ-ವೈಜ್ಞಾನಿಕ ಮನೋಭಾವದ ಮಕ್ಕಳಿಂದ. ಆದ್ದರಿಂದ ಮಕ್ಕಳು ಪ್ರಾಥಮಿಕ ಶಿಕ್ಷಣದಿಂದಲೇ ಮೌಢ್ಯ, ಕಂದಾಚಾರದಿಂದ ದೂರ ಉಳಿಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಭಾರತದ ಪ್ರಪ್ರಥಮ ಪ್ರಧಾನ ಮಂತ್ರಿಗಳಾದ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮ ದಿನಾಚರಣೆಯ ಅಂಗವಾಗಿ “ರಾಜ್ಯ ಮಟ್ಟದ ಮಕ್ಕಳ ದಿನಾಚರಣೆ ಮತ್ತು ಪೋಷಕರ-ಶಿಕ್ಷಕರ ಮಹಾಸಭೆ” ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, ನೆಹರೂ ಅವರು ಮಕ್ಕಳನ್ನು ಹೆಚ್ಚು ಪ್ರೀತಿಸುತ್ತಿದ್ದರು. ಮಕ್ಕಳೇ ಭಾರತದ ಭವಿಷ್ಯ ಎನ್ನುವ ದೂರದೃಷ್ಟಿ ಹೊಂದಿದ್ದ ನೆಹರೂ ಅವರು ಮಕ್ಕಳಲ್ಲಿ ವೈಜ್ಞಾನಿಕ ಮನೋಧರ್ಮ ರೂಪಿಸುವ ಶಿಕ್ಷಣಕ್ಕೆ ಒತ್ತು ನೀಡಿದ್ದರು. ಅದರಂತೆಯೇ ನಮ್ಮ ಸರ್ಕಾರ ಕೂಡ ಶಿಕ್ಷಣಕ್ಕೆ ಪ್ರಥಮ ಆದ್ಯತೆ ನೀಡಿದ್ದು, 2025-26ನೇ ಸಾಲಿನ ಆಯವ್ಯಯದಲ್ಲಿ 65000 ಕೋಟಿ ರೂಪಾಯಿಗಳನ್ನು ಶಿಕ್ಷಣಕ್ಕಾಗಿ ನೀಡುತ್ತಿದೆ ಎಂದರು.
ನೆಹರೂ ತಮ್ಮ ಯೌವ್ವನದ 3200 ಕ್ಕೂ ಹೆಚ್ಚು ದಿನಗಳನ್ನು ಜೈಲಿನಲ್ಲಿ ಕಳೆದ ಹೋರಾಟಗಾರ. ಅತೀ ಶ್ರೀಮಂತ ಕುಟುಂಬದಿಂದ ಬಂದಿದ್ದರೂ ದೇಶದ ಸ್ವಾತಂತ್ರ್ಯಕ್ಕಾಗಿ ಸೆರೆಮನೆ ಸೇರಿದರು. ದೇಶದ ಪ್ರಧಾನಿಯಾಗಿ ಕೃಷಿ, ವಿಜ್ಞಾನ, ನೀರಾವರಿ, ತಂತ್ರಜ್ಞಾನ ಸೇರಿ ದೇಶದ ಸಮಗ್ರ ಅಭಿವೃದ್ಧಿಗೆ ಅಡಿಪಾಯ ಹಾಕಿದರು. ಐ.ಐ.ಟಿ, ಏಮ್ಸ್ ಸೇರಿ ಅಣೆಕಟ್ಟು, ಕೈಗಾರಿಕೆಗಳನ್ನೆಲ್ಲಾ ಮಾಡಿದ್ದು ನೆಹರೂ ಅವರೆ. ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸದೆ ಬ್ರಿಟಿಷರ ಜೊತೆ ಕೈಜೋಡಿಸಿದ್ದವರು ನೆಹರೂ ಮತ್ತು ಗಾಂಧೀಜಿಯವರನ್ನು ಟೀಕಿಸುತ್ತಾರೆ. ಯಾರಿಗೆ ಸ್ವಾತಂತ್ರ್ಯದ ಅರ್ಥ ತಿಳಿದಿಲ್ಲವೋ ಅವರು ಇಂತಹ ಟೀಕೆಗಳನ್ನು ಮಾಡುವ ಕೆಲಸಗಳನ್ನು ಮಾಡುತ್ತಿದ್ದಾರೆ. ಇದನ್ನು ಮಕ್ಕಳು ಮತ್ತು ಶಿಕ್ಷಕರು ಹಾಗೂ ಪೆÇೀಷಕರು ಅರ್ಥ ಮಾಡಿಕೊಳ್ಳಬೇಕು ಎಂದರು.
ಶಿಕ್ಷಣ ಯಾರ ಸ್ವತ್ತೂ ಅಲ್ಲ. ಎಲ್ಲಾ ಮಕ್ಕಳು ಅವಕಾಶಗಳನ್ನು ಸರಿಯಾಗಿ ಬೆಳೆಸಿಕೊಳ್ಳಬೇಕು. ಕೆಲವು ಪೊಷಕರು ತಮ್ಮ ಮಕ್ಕಳು ಖಾಸಗಿ ಆಂಗ್ಲಶಾಲೆÉಗಳಲ್ಲಿ ಕಲಿಯಬೇಕು ಎಂಬ ಹುಚ್ಚು ಹೊಂದಿದ್ದಾರೆ. ಆದರೆ ಇಂದು ಸರ್ಕಾರಿ ಶಾಲೆಗಳಲ್ಲಿ ಕಲಿತ ಮಕ್ಕಳು, ಖಾಸಗಿ ಶಾಲೆಗಳಲ್ಲಿ ಕಲಿತ ಮಕ್ಕಳಿಗಿಂತ ಹೆಚ್ಚು ಅಂಕಗಳನ್ನು ಗಳಿಸಿ ಉನ್ನತ ಮಟ್ಟಕ್ಕೇರುತ್ತಿದ್ದಾರೆ. ಈಗ ಈ ವೇದಿಕೆಯಲ್ಲಿ ಸನ್ಮಾನಿತರಾದ ವಿದ್ಯಾರ್ಥಿಗಳೆಲ್ಲರೂ ಬಡ ಕುಟುಂಬದಿಂದ ಬಂದು ಸರ್ಕಾರಿ ಶಾಲೆಗಳಲ್ಲಿ ಓದಿದವರು. ಬಡ ಕುಟುಂಬದ ಮಕ್ಕಳಿಗೂ ಸಹ ಆಂಗ್ಲ ಮಾಧ್ಯಮದಲ್ಲಿ ಕಲಿಕೆಯನ್ನು ರೂಪಿಸಬೇಕು ಎನ್ನುವ ದೃಷ್ಠಿಯನ್ನು ನಮ್ಮ ಸರ್ಕಾರ ಹೊಂದಿದ್ದು, ಈ ವರ್ಷ ಒಟ್ಟು 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ತೆರೆಯುತ್ತಿದೆ. ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರ ಶ್ರಮಿಸುತ್ತಿದೆ. ನಾನೂ ಸರ್ಕಾರಿ ಶಾಲೆಯಲ್ಲಿ ಓದಿಯೇ ಮುಖ್ಯಮಂತ್ರಿ ಆಗಿದ್ದೀನಿ ಎಂದರು.
ಮಕ್ಕಳು ಯಾವುದೇ ರೀತಿಯ ಮೌಡ್ಯಗಳಿಗೆ ಒಳಗಾಗಬಾರದು. ಎಲ್ಲರೂ ವೈಜ್ಞಾನಿಕ ಮತ್ತು ವೈಚಾರಿಕ ಮನೋಭಾವ ಬೆಳೆಸಿಕೊಳ್ಳಬೇಕು. ಮನುಷ್ಯ ಮನುಷ್ಯನನ್ನು ಜಾತಿ, ಧರ್ಮ, ಭಾμÉಯ ಮಿತಿ ಇಲ್ಲದೆ ಪ್ರೀತಿಸಬೇಕು. ಜಾತಿ ವ್ಯವಸ್ಥೆಯ ಆಧಾರದ ಮೇಲೆ ತಾರತಮ್ಯ ಮಾಡುವವರನ್ನು ಹತ್ತಿರಕ್ಕೆ ಸೇರಿಸದೆ, ಪ್ರತಿಯೊಬ್ಬರೂ ಸಂವಿಧಾನದ ಆಶಯದಂತೆ ಸಹಿಷ್ಣತೆ ಮತ್ತು ಸಹಭಾಳ್ವೆಯನ್ನು ಪಾಲಿಸುವ ಮೂಲಕ ವೈವಿದ್ಯತೆಯಲ್ಲಿ ಏಕತೆಯನ್ನು ಉಳಿಸಿ ಬೆಳೆಸುವಂತಾಗಬೇಕು. ಅದಕ್ಕಾಗಿಯೇ ಎಲ್ಲಾ ವಿದ್ಯಾರ್ಥಿಗಳಿಗೂ ಸಂವಿಧಾನದ ಧ್ಯೇಯೋದ್ದೇಶ ಅರ್ಥವಾಗಬೇಕು ಎನ್ನುವ ದೃಷ್ಠಿಯಿಂದ ಎಲ್ಲಾ ಶಾಲಾ-ಕಾಲೇಜುಗಳಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಇಂದಿರಾ ಆಹಾರ ಕಿಟ್ ವಿತರಣೆ :
ಸರ್ಕಾರಿ ಶಾಲೆಗಳ ಮಕ್ಕಳು ಸ್ವಾಭಿಮಾನದಿಂದ ಸಮಾಜಮುಖಿಯಾಗಿ ಬೆಳೆಯಲು ಉತ್ತಮ ಶಿಕ್ಷಣ ಪಡೆಯಲು ನಮ್ಮ ಸರ್ಕಾರ ಸಕಲ ಸವಲತ್ತುಗಳನ್ನೂ ನೀಡುತ್ತಿದೆ. ಬಡತನ ರೇಖೆಗಿಂತ ಕೆಳಗಿರುವವರು ಸಬಲರಾಗಲು ನಾವು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ಅನ್ನಭಾಗ್ಯ ಯೋಜನೆಯಡಿ ನೀಡಲಾಗುತ್ತಿರುವ ಪಡಿತರದ ಜೊತೆಗೆ ಅಡುಗೆಗೆ ಬೇಕಾಗಿರುವ ಎಣ್ಣೆ, ಬೇಳೆಕಾಳು ಇನ್ನಿತರ ಪಡಿತರಗಳನ್ನು ಹೊಂದಿರುವ ಇಂದಿರಾ ಕಿಟ್ಗಳನ್ನು ನೀಡಲಾಗುತ್ತಿದೆ. ಮಕ್ಕಳು ಬರಿಗಾಲಿನಲ್ಲಿ ಓಡಾಡಬಾರದು ಎನ್ನುವ ದೃಷ್ಠಿಯನ್ನು ಹೊಂದಿರುವ ನಮ್ಮ ಸರ್ಕಾರ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಶೂಗಳನ್ನು ವಿತರಿಸುತ್ತಿದೆ. ಇದರೊಂದಿಗೆ ಸಮವಸ್ತ್ರ, ಮೊಟ್ಟೆ, ಬಾಳೆಹಣ್ಣು ಅಲ್ಲದೇ ಪಠ್ಯ ಪುಸ್ತಕ, ನೋಟ್ ಪುಸ್ತಕ, ಕಾಂಪಾಸ್, ಇತ್ಯಾದಿಗಳನ್ನು ಸಹ ಸರ್ಕಾರ ಒದಗಿಸುತ್ತಿದೆ. ವಸತಿ ಶಾಲೆಗಳಲ್ಲಿ ಅವಕಾಶ ಸಿಗದ ಮಕ್ಕಳಿಗೆ ವಿದ್ಯಾಸಿರಿ ಯೋಜನೆಯಡಿ ಪ್ರತಿ ತಿಂಗಳು ರೂಂ ಬಾಡಿಗೆ ಹಾಗೂ ಊಟೋಪಚಾರಕ್ಕಾಗಿ ರೂ. 1500/-ಗಳ ಸಹಾಯಧನವನ್ನು ನೀಡಲಾಗುತ್ತಿದೆ ಎಂದು ತಿಳಿಸಿದರು.
ಶಕ್ತಿ ಯೋಜನೆಯಡಿ ಮಹಿಳೆಯರು ಪ್ರಯಾಣಿಸಲು ಅನುಕೂಲವಾಗುವಂತೆ ಉಚಿತ ಬಸ್ ಸೌಲಭ್ಯ, ಗೃಹ ಜ್ಯೋತಿ ಯೋಜನೆಯಡಿ, 200 ಯುನಿಟ್ಗಳ ಉಚಿತ ವಿದ್ಯುತ್ ಸೌಲಭ್ಯ, ಗೃಹಲಕ್ಷ್ಮಿ ಯೋಜನೆಯಡಿ 1 ಕೋಟಿ 20 ಲಕ್ಷ ಮಹಿಳೆಯರಿಗೆ ಪ್ರತಿ ತಿಂಗಳು ತಲಾ ರೂ 2000/- ಸಹಾಯಧನವನ್ನು ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಮಕ್ಕಳಿಗೆ ಶಿಕ್ಷಣ ಕೊಟ್ಟರೆ ಅದು ದೇವರ ಪ್ರಸಾದವಾಗಿ ಹೊರ ಬರುತ್ತದೆ - ಸಚಿವ ಮಧು ಬಂಗಾರಪ್ಪ
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಮಾತನಾಡಿ, ಮಕ್ಕಳು ಈ ದೇಶದ ಭವಿಷ್ಯ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಟ್ಟರೆ ಅದು ದೇವರ ಪ್ರಸಾದದ ರೀತಿಯಲ್ಲಿ ಹೊರಬರುತ್ತದೆ. ದೇಶ ಅಭಿವೃದ್ಧಿಯಾಗಬೇಕಾದರೆ ಅದು ಶಿಕ್ಷಣದಿಂದ ಮಾತ್ರ ಸಾಧ್ಯ. ಮಕ್ಕಳು ಉತ್ತಮ ಶಿಕ್ಷಣ ಪಡೆಯುವ ಮೂಲಕ ದೇಶಕ್ಕೆ ಹೆಗ್ಗಳಿಕೆ ತರುವ ಕೆಲಸ ಮಾಡಬೇಕು ಎಂದರು.
ಮಕ್ಕಳಲ್ಲಿ ಉತ್ತಮ ಆಲೋಚನೆ, ಚಿಂತನೆ, ಉತ್ತಮ ಭವಿಷ್ಯವನ್ನು ರೂಪಿಸುವಂತಹ ಕೆಲಸವನ್ನು ಶಾಲಾ ಶಿಕ್ಷಣ ಇಲಾಖೆ ಮಾಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಅತ್ಯುತ್ತಮ ನುರಿತ ಶಿಕ್ಷಕರಿದ್ದಾರೆ. ಇಡೀ ರಾಜ್ಯದಲ್ಲಿ ಇಂದಿನಿಂದ ದಾಖಲಾತಿ ಆಂದೋಲನ ಆರಂಭ ಮಾಡುತ್ತಿದ್ದು, ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಸೇರಿಸುವ ಮೂಲಕ ಮಕ್ಕಳಿಗೆ ಉಜ್ವಲ ಭವಿಷ್ಯವನ್ನು ರೂಪಿಸಬೇಕು ಎಂದು ಹೇಳಿದರು.
ರಾಜ್ಯದಲ್ಲಿ 51000 ಅತಿಥಿ ಶಿಕ್ಷಕರನ್ನು ಒಂದೇ ಬಾರಿಗೆ ನೇಮಕ ಮಾಡಲಾಗಿದೆ. ಸರ್ಕಾರಿ ಮತ್ತು ಅನುದಾನಿತ ಶಾಲೆಗಳಿಗೆ 18000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪ್ರಗತಿಯಲ್ಲಿದೆ. ಒಟ್ಟಾರೆ ಶಾಲಾ ಮತ್ತು ಶಿಕ್ಷಣ ಇಲಾಖೆ ಗುಣಮಟ್ಟದ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗುತ್ತಿದೆ.
ರಾಜ್ಯದಲ್ಲಿ 900 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಪ್ರತಿಯೊಂದು ಶಾಲೆಯಲ್ಲಿ 1200 ಮಕ್ಕಳು ಕಲಿಯಲು ಅನುಕೂಲ ಮಾಡಿಕೊಡಲಾಗುತ್ತಿದೆ. ಮುಂದಿನ ದಿನಗಳಲ್ಲಿ ಪ್ರತಿಯೊಂದು ಗ್ರಾಮ ಪಂಚಾಯಿತಿಗೆ ಒಂದರಂತೆ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲೂ ಕರ್ನಾಟಕ ಪಬ್ಲಿಕ್ ಶಾಲೆ ತೆರೆಯಲು ಕ್ರಮವಹಿಸಿ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸಲಾಗುವುದು. ನಮ್ಮ ರಾಜ್ಯವು ದೇಶದಲ್ಲಿಯೇ ಮೊದಲು 25000 ಮಕ್ಕಳಿಗೆ ಉಚಿತವಾಗಿ ಎನ್ಇಇಟಿ ಮತ್ತು ಸಿಇಟಿ ಕೋಚಿಂಗ್ ನೀಡುತ್ತಿದೆ. ಇದರಿಂದ ಸಾಕಷ್ಟು ವಿದ್ಯಾರ್ಥಿಗಳಿಗೆ ಅನುಕೂಲವಾಗಿದ್ದು, ಸರ್ಕಾರಿ ಶಾಲೆಗಳಲ್ಲಿ ಕಲಿತ ಮಕ್ಕಳು ಐಐಟಿಯಂತಹ ಅತ್ಯುನ್ನತ ಕಾಲೇಜುಗಳಲ್ಲಿ ಸೀಟುಗಳನ್ನು ಪಡೆಯುತ್ತಿರುವುದು ಹೆಮ್ಮೆಯ ವಿಷಯವಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ಒಂದರಿಂದ ಹತ್ತನೇ ತರಗತಿಯ ಮೌಲ್ಯ ಶಿಕ್ಷಣದ ಚಟುವಟಿಕೆ ಪುಸ್ತಕದ ಡಿಜಿಟಲ್ ಅವತರಣಿಕೆಯನ್ನು ಬಿಡುಗಡೆ ಮಾಡಿದರು ಹಾಗೂ 2024-25ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಉತ್ತಮ ಅಂಕಗಳಿಸಿದ ವಿದ್ಯಾರ್ಥಿಗಳಿ ಹಾಗೂ ಪದವಿ ಪೂರ್ವ ಶಿಕ್ಷಣದಲ್ಲಿ ಹೆಚ್ಚಿನ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪುರಸ್ಕಾರವನ್ನು ಸಹ ವಿತರಿಸಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ತಿನ ಸದಸ್ಯರು ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ನಸೀರ್ ಅಹಮ್ಮದ್, ಗ್ಯಾರಂಟೆ ಯೋಜನೆಗಳ ಅನುಷ್ಠಾನ ಪ್ರಾದಿಕಾರದ ಅಧ್ಯಕ್ಷರಾದ ಹೆಚ್.ಎಂ. ರೇವಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿಗಳಾದ ಡಾ. ಶಾಲಿನಿ ರಜನೀಶ್, ವಿಧಾನ ಪರಿಷತ್ತಿನ ಸದಸ್ಯರಾದ ಬಲ್ಕಿಸ್ ಬಾನು, ವಿಧಾನ ಸಭೆಯ ಸದಸ್ಯರಾದ ವಿಜಯಾನಂದ ಕಾಶಪ್ಪನವರ್, ಬಿ.ಬಿ. ಚಿಮ್ಮನಕಟ್ಟಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ವಿ. ರಶ್ಮಿ ಮಹೇಶ್, ಆಯುಕ್ತರಾದ ವಿಕಾಸ್ ಕಿಶೋರ್ ಸುರಳ್ಕರ್ ಸೇರಿದಂತೆ ವಿವಿಧ ಶಾಲಾ ಕಾಲೇಜುಗಳ ಪ್ರಾಧ್ಯಾಪಕರು, ಶಿಕ್ಷಕರು, ವಿದ್ಯಾರ್ಥಿಗಳು, ಪೋಷಕರು ಮತ್ತು ಗಣ್ಯರು ಉಪಸ್ಥಿತರಿದ್ದರು








